DAKSHINA KANNADA

ಶಾಲೆಗಳಲ್ಲಿ ತುಳು ಪಠ್ಯ ವಿಸ್ತರಣೆ: ಅಕಾಡಮಿ, ಅಖಿಲ ಭಾರತ ತುಳು ಒಕ್ಕೂಟ ನಿರ್ಧಾರ

Posted on

Share

ಮಂಗಳೂರು: ತುಳುವನ್ನು ತೃತೀಯ ಭಾಷೆಯಾಗಿ ಶಾಲೆಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳ ಹಾಗೂ ಶಾಲೆಗಳ ಸಂಖ್ಯೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನವನ್ನು ನಡೆಸುವ ಬಗ್ಗೆ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಹಾಗೂ ಅಖಿಲ ಭಾರತ ತುಳು ಒಕ್ಕೂಟ ನಿರ್ಧರಿಸಿದೆ.

ತುಳು ಅಕಾಡೆಮಿಯಲ್ಲಿ ತುಳು ಪ್ರೇಮಿಗಳ ನಿಯೋಗ

ಕರ್ನಾಟಕ ತುಳು ಸಾಹಿತ್ಯ ಅಕಾಡಮಿಗೆ ಶುಕ್ರವಾರ ಭೇಟಿ ನೀಡಿದ ಅಖಿಲ ಭಾರತ ತುಳು ಒಕ್ಕೂಟದ ಪದಾಧಿಕಾರಿಗಳೊಂದಿಗೆ ತುಳು ಅಕಾಡಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಶಾಲೆಗಳಲ್ಲಿ ತುಳು ಪಠ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಸಮಾಲೋಚನೆ ಸಂದರ್ಭ ಅಭಿಪ್ರಾಯ ಹಂಚಿಕೊಂಡ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ.ಭಂಡಾರಿ ತುಳು ಪಠ್ಯಕ್ರಮವನ್ನು ವಿಸ್ತರಿಸುವ ಬಗ್ಗೆ ಅಕಾಡಮಿಯು ಕೈಗೊಳ್ಳುವ ಎಲ್ಲಾ ಕೆಲಸ ಕಾರ್ಯದಲ್ಲಿ ತುಳು ಒಕ್ಕೂಟವು ಸಕ್ರಿಯವಾಗಿ ಭಾಗವಹಿಸುವುದಾಗಿ ತಿಳಿಸಿದರು.

ಪ್ರೌಢಶಾಲೆಗಳಲ್ಲಿ ತುಳು ಪಠ್ಯ ಬೋಧಿಸಲು ಅತಿಥಿ ಶಿಕ್ಷಕರನ್ನು ನೇಮಿಸುವ ಬಗ್ಗೆ ಸರಕಾರಕ್ಕೆ ಸಲ್ಲಿಸಲಾಗಿರುವ ಮನವಿಯ ಕುರಿತಾಗಿ ಪ್ರೌಢಶಿಕ್ಷಣ ಸಚಿವರನ್ನು ಭೇಟಿ ಮಾಡಿ ಚರ್ಚಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು.

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಜಾರಿಮಾಡುವ ನಿಟ್ಟಿನಲ್ಲಿ ಶೀಘ್ರ ಕ್ರಮಕೈಗೊಳ್ಳುವಂತೆ ಸರಕಾರವನ್ನು ಒತ್ತಾಯಿಸುವ ಬಗ್ಗೆ ಚರ್ಚಿಸಲಾಯಿತು.

ಅಕಾಡಮಿ ವತಿಯಿಂದ ಡಿಸೆಂಬರ್‌ನಲ್ಲಿ ದೇಶ ವಿದೇಶಗಳ ತುಳುಪರ ಸಂಘಟನೆಗಳ ಪ್ರತಿನಿಧಿ ಸಮಾವೇಶ ಆಯೋಜಿಸಲು ಉದ್ದೇಶಿಸಿರುವ ಬಗ್ಗೆ ಅಕಾಡಮಿ ಅಧ್ಯಕ್ಷರು ಅಖಿಲ ಭಾರತ ತುಳು ಒಕ್ಕೂಟದ ನಿಯೋಗಕ್ಕೆ ಮಾಹಿತಿ ನೀಡಿದರು.

ಅಕಾಡಮಿಗೆ ಭೇಟಿ ನೀಡಿದ ನಿಯೋಗದಲ್ಲಿ ಅಖಿಲ ಭಾರತ ತುಳು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ ಮುಂಬೈ, ಉಪಾಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಯೋಗೀಶ್ ಶೆಟ್ಟಿ ಜೆಪ್ಪು, ಪ್ರಧಾನ ಕಾರ್ಯದರ್ಶಿ ಪಿ.ಎ. ಪೂಜಾರಿ, ಸಮಿತಿ ಸದಸ್ಯರಾದ ಸುಧಾಕರ ಆಳ್ವ, ವಿಜಯಲಕ್ಷ್ಮಿ ಶೆಟ್ಟಿ, ಚಂದ್ರಶೇಖರ ಸುವರ್ಣ, ಮುಲ್ಕಿ ಕರುಣಾಕರ ಶೆಟ್ಟಿ, ಸೇಸಪ್ಪರೈ ರಾಮಕುಂಜ, ಚಂದ್ರಹಾಸ ದೇವಾಡಿಗ, ತಾರಾನಾಥ್ ಶೆಟ್ಟಿ ಬೋಳಾರ್, ಗಣೇಶ್ ಮುಲ್ಕಿ, ಪ್ರಶಾಂತ್ ಭಟ್ ಕಡಬ ಉಪಸ್ಥಿತರಿದ್ದರು.

Most Popular

Exit mobile version